ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಸ್ಥಳೀಯ ಸಂಸ್ಥೆ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜು, ಉಜಿರೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಜನಪದ ಗೀತಾಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಹಾಗೂ ರೇಂಜರ್ಸ್ ತಂಡಗಳು ಸತತ ನಾಲ್ಕನೇ ಬಾರಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿವೆ.
ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜನಪದ ಗೀತಾಗಾಯನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸುವ ಮೂಲಕ ಕಾಲೇಜಿನ ಸಾಧನೆಯ ಪರಂಪರೆಯನ್ನು ಮತ್ತೊಮ್ಮೆ ಮುಂದುವರಿಸಿವೆ. ಎರಡೂ ತಂಡಗಳು ಸತತ ನಾಲ್ಕನೇ ಬಾರಿಗೆ ಪ್ರಥಮ ಸ್ಥಾನ ಪಡೆದುಕೊಂಡಿರುವುದು ಕಾಲೇಜಿಗೆ ಹೆಮ್ಮೆಯ ಸಂಗತಿಯಾಗಿದೆ.
ತಂಡಗಳನ್ನು ಉತ್ತಮ ರೀತಿಯಲ್ಲಿ ಸಜ್ಜುಗೊಳಿಸುವಲ್ಲಿ ರೋವರ್ ಲೀಡರ್ (RL) ಶ್ರೀಮತಿ ರಕ್ಷಾ ಹಾಗೂ ರೇಂಜರ್ ಲೀಡರ್ (RSL) ಬೆಳಿಯಪ್ಪ ಕೆ. ಅವರ ಮಾರ್ಗದರ್ಶನ ಮತ್ತು ತರಬೇತಿ ಪ್ರಮುಖ ಪಾತ್ರ ವಹಿಸಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಷ್ಣು ಪ್ರಕಾಶ್ ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ತಂಡಗಳು ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಆಡಳಿತ ಮಂಡಳಿ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ರೋವರ್ಸ್ ಮತ್ತು ರೇಂಜರ್ಸ್ ತಂಡದ ಸಾಧನೆಗೆ ಅಭಿನಂದನೆ ವ್ಯಕ್ತಪಡಿಸಿದ್ದಾರೆ.